ಆರ್ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ೨೦೨೫ ಜೂನ್ ೪ರ ಬುಧವಾರ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತರಾಗಿ, 47 ಮಂದಿ ಗಾಯಗೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡವು ಜೂನ್ ೩ರಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-೨೦ ಪಂದ್ಯದಲ್ಲಿ ೧೭ ವರ್ಷಗಳ ಬಳಿಕ ಗೆದ್ದ ಹಿನ್ನೆಲೆಯಲ್ಲಿ ಕ್ರಿಕೆಟ್ ಅಸೋಸಿಯೇಷನ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡದ್ದ ವಿಜಯೋತ್ಸವ ಸಂದರ್ಭದಲ್ಲಿ ಈ ಕಾಲ್ತುಳಿತದ ದುರಂತ ಘಟಿಸಿದೆ.
ʼನಿರೀಕ್ಷೆ ಮೀರಿದ ಜನಸಂದಣಿಯ ಕಾರಣದಿಂದ ಈ ದುರಂತ ಸಂಭವಿಸಿದೆʼ ಎಂದು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ʼಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ್ದೇನೆ, ತಮ್ಮವರನ್ನು ಕಳೆದುಕೊಂಡವರನ್ನು ಸಂತೈಸಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಈ ಘಟನೆಯ ಬಗ್ಗೆ ನಮಗೆ ಮರುಕವಿದೆ.ʼ ಎಂದು ಅವರು ಹೇಳಿದ್ದಾರೆ.
ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರಿಗೆ ರೂ.10 ಲಕ್ಷ ಪರಿಹಾರ ನೀಡಲಿದ್ದೇವೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇನೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮಂಗಳವಾರ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಬಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಆದರೂ ಸರ್ಕಾರ ಆಯೋಜಿಸಿದ್ದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.
ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಕ್ರಿಕೆಟ್ ಅಸೋಸಿಯೇಷನ್ ನಡೆಸುವ ಕಾರ್ಯಕ್ರಮಗಳಿಗೆ ಭದ್ರತೆ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆಯಷ್ಟೇ ಎಂದು ಸಿದ್ಧರಾಮಯ್ಯ ನುಡಿದರು.
PARYAYA: ಆರ್ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು: ಆರ್ಸಿಬಿ ವಿಜಯೋತ್ಸವ, ಮಹಾದುರಂತ: ೧೧ ಜನರ ಸಾವು ಬೆಂ ಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ೨೦೨೫ ಜೂನ್ ೪ರ ಬುಧವಾರ ಐಪಿಎಲ್ ವಿಜಯೋತ್ಸವ ಸಂದರ್ಭದಲ್...